ಸಿಎಂ ಸಿದ್ದರಾಮಯ್ಯ-ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ ಪ್ರಾರಂಭವಾಗಿದೆ. ಜಿಬಿಎ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ರಾಜ್ಯ ಸರ್ಕಾರ ಕಳೆದ ಅಧಿವೇಶನದಲ್ಲಿ ಒಪ್ಪಿಗೆ ಪಡೆದಿದ್ದ ‘ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌’ ವಿಧೇಯಕವನ್ನು ರಾಜ್ಯಪಾಲರು ಪರಿಶೀಲನೆಗಾಗಿ ಬಾಕಿ ಉಳಿಸಿಕೊಂಡಿದ್ದಾರೆ.

ಕಳೆದ ಅಧಿವೇಶನದಲ್ಲಿ ಅಂಗೀಕಾರಗೊಂಡ 11 ವಿಧೇಯಕಗಳ ಪೈಕಿ, ‘ಇವ ನಮ್ಮವ ಇವ ನಮ್ಮವ’ ವಿಧೇಯಕವೂ ಸೇರಿದಂತೆ 10 ವಿಧೇಯಕಕ್ಕೆ ಮಾತ್ರ ಅಂಕಿತ ಹಾಕಿದ್ದಾರೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಬ್ಯಾಲೆಟ್‌ ಮೂಲಕ ನಡೆಸುವುದಕ್ಕಾಗಿ ಪಂಚಾಯತ್‌ ರಾಜ್‌ ಕಾಯ್ದೆ ತಿದ್ದುಪಡಿ ವಿಧೇಯಕವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

ಈ ವಿಧೇಯಕಕ್ಕೆ ಸಂಬಂಧಪಟ್ಟಂತೆ ವಿಧಾನಸಭೆಯಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ಭಾರಿ ಸಂಘರ್ಷ ಏರ್ಪಟ್ಟಿತ್ತು. ಐಟಿಬಿಟಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರನ್ನು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದವು. ಕಾಂಗ್ರೆಸ್‌ ಸರ್ಕಾರ ರಾಜ್ಯವನ್ನು ಮತ್ತೆ ಶಿಲಾಯುಗದತ್ತ ಕರೆದೊಯ್ಯುತ್ತಿದೆ ಎಂದು ವಿಪಕ್ಷಗಳು ಆಕ್ಷೇಪ ಎತ್ತಿದ್ದವು. ಆದರೆ, ಇದ್ಯಾವುದನ್ನೂ ಗಣನೆಗೆ ತೆಗೆದುಕೊಳ್ಳದ ಸರ್ಕಾರ ವಿಧೇಯಕವನ್ನು ಧ್ವನಿಮತಕ್ಕೆ ಹಾಕಿ ಅಂಗೀಕಾರ ಪಡೆದುಕೊಂಡಿತ್ತು.

Leave a Reply

Your email address will not be published. Required fields are marked *